
ಸುದ್ದಿ ಬೆಳಕು ವಾರ್ತೆ
ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ ಹಾಗೂ ವಿವಿಧ ಕಲೆಗಳ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವಂತೆ ಒತ್ತಾಯಿಸಿದರು. ಅಲ್ಲದೆ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಂಗೀತ ಶಿಕ್ಷಣ ದೊರೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಗೀತ, ನೃತ್ಯ, ನಾಟಕ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ಯುವ ಕಲಾವಿದರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯದ ಕಲಾ ಶಿಕ್ಷಣ ಕ್ಷೇತ್ರದ ಸವಾಲುಗಳು, ಶಿಕ್ಷಕರ ಕೊರತೆ ಹಾಗೂ ಸಂಗೀತ ಶಿಕ್ಷಣದ ಉನ್ನತೀಕರಣ ಕುರಿತು ಕುಲಪತಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಮನವಿಯನ್ನು ಸ್ವೀಕರಿಸಿದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರು ವಿಷಯಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಭೇಟಿಯ ಸಂದರ್ಭದಲ್ಲಿ ಶರಣು ಬಿ. ಗದ್ದುಗೆ ಅವರು ಕುಲಪತಿಗಳಿಗೆ ಕನ್ನಡ ಶಾಲು ಹೊದಿಸಿ ಗೌರವಿಸಿದರು.











Leave a Reply