
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಯಾದಗಿರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಇಂದೂಧರ್ ಸಿನ್ನೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಡೆಯುವ ಕಾರ್ಯಕ್ರಮವನ್ನು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಲಿದ್ದು, ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಪಾಂಡ್ಡೆ ರಾಹುಲ್ ತುಕಾರಾಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ, ಖ್ಯಾತ ಉದ್ಯಮಿ ಡಾ. ಎಸ್.ಪಿ. ದಯಾನಂದ ಪಟ್ಟಣಶೆಟ್ಟಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ ಗಂಗಾಧರ ಮೊದಲಿಯಾರ್ ಅವರು ಬದಲಾಗುತ್ತಿರುವ ಮಾಧ್ಯಮ ಲೋಕದಲ್ಲಿ ಪತ್ರಕರ್ತರ ಜವಾಬ್ದಾರಿ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಲಿದ್ದು, ಜಿಲ್ಲೆಯ ಪತ್ರಕರ್ತರು, ಸಾರ್ವಜನಿಕರು ಹಾಗೂ ಆಹ್ವಾನಿತ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಇಂದೂಧರ್ ಸಿನ್ನೂರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.











Leave a Reply