
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ ಮಾಹಿತಿ ಪಡೆದು, ಗ್ರಾಮ ಮಟ್ಟ, ನಾಡ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳ (AO) ಕಚೇರಿಗಳ ಮೂಲಕ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯ ಹಾಗೂ ಕೇಂದ್ರದ ಯೋಜನೆಗಳ ಲಾಭ ಪಡೆಯಿರಿ
ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಸಾಧ್ಯವಾದಷ್ಟು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಂಡು ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಅವರು ಮನವಿ ಮಾಡಿದರು.
‘ಉಳುಮೆ ಮಾಡಬೇಡಿ’ ಹೇಳಿಕೆಗೆ ಆಕ್ಷೇಪ
ರೈತರು ಸದ್ಯ ಉಳುಮೆ ಮಾಡಬಾರದು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿದ ಮಾಗನೂರ, ರಾಜ್ಯದ ಶೇ.70ಕ್ಕೂ ಹೆಚ್ಚು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ರೈತರು ಬಿತ್ತನೆ ಮಾಡದಿದ್ದರೆ ಜೀವನೋಪಾಯ ಹೇಗೆ ನಡೆಸಬೇಕು ಎಂದು ಪ್ರಶ್ನಿಸಿದರು.
ಒಂದು ವೇಳೆ ಸರ್ಕಾರ ಬಿತ್ತನೆ ಮಾಡಬೇಡಿ ಎಂದು ಹೇಳುವುದಾದರೆ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ಸಚಿವರ ನೇಮಕಕ್ಕೆ ಆಗ್ರಹ
ರಾಜ್ಯದಲ್ಲಿ ಇದುವರೆಗೂ ಕೃಷಿ ಸಚಿವರ ನೇಮಕವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಕೃಷಿ ಸಚಿವರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಶಾಸಕರಿದ್ದರೂ, ಇಲ್ಲಿನ ರೈತರ ಸಂಕಷ್ಟ ಸರ್ಕಾರದ ಗಮನಕ್ಕೆ ಬರುತ್ತಿಲ್ಲ ಎಂದು ಟೀಕಿಸಿದರು.
ಬಸವಸಾಗರ ಜಲಾಶಯಕ್ಕೆ ನೀರಿನ ಹರಿವು ಶೂನ್ಯ
ಸುರಪುರ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು 4 ಲಕ್ಷ ಹೆಕ್ಟೇರ್ ನೀರಾವರಿ ಭೂಮಿ ಇದ್ದರೂ, ಜಲಾಶಯಕ್ಕೆ ಪ್ರಸ್ತುತ ನೀರಿನ ಒಳಹರಿವು ಶೂನ್ಯವಾಗಿದೆ. ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಕಾಯ್ದಿರಿಸಲಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಜಿಲ್ಲೆಯ ಶೇ.95ರಷ್ಟು ರೈತರು ಅಲ್ಪ ಪ್ರಮಾಣದ ಮಳೆಯನ್ನು ನಂಬಿ ಬಿತ್ತನೆ ಮಾಡಿದ್ದು, ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ರೈತರೊಂದಿಗೆ ವಿಶೇಷ ಸಭೆ ನಡೆಸಿ ಅವರ ಅಹವಾಲು ಆಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ
ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರನ್ನು ರಕ್ಷಿಸಲು ಸರ್ಕಾರ ತಕ್ಷಣವೇ ವಿವಿಧ ಬೆಳೆಗಳಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಿ ಬಿಡುಗಡೆ ಮಾಡಬೇಕು ಎಂದು ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದರು.











Leave a Reply