ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ

Posted by

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ “ಕನ್ನಡ ಸಾಮರಸ್ಯದ ನೆಲೆಗಳು” ಯೋಜನೆಯಡಿ 41 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಉದ್ದೇಶವಿದ್ದು, ಉಳಿದ 59 ಕೃತಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ. ದೇಶ ಹಾಗೂ ರಾಜ್ಯದಲ್ಲಿ ಭಾಷೆ, ಧರ್ಮ ಮತ್ತು ಸಂಸ್ಕೃತಿಗಳ ವೈವಿಧ್ಯತೆ ಇದ್ದರೂ ಅದರಲ್ಲಿ ಏಕತೆಯನ್ನು ಸಾಧಿಸಿರುವುದು ನಮ್ಮ ವಿಶೇಷತೆ ಎಂದು ಹೇಳಿದರು.

ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಸೇರಿದಂತೆ ಅನೇಕ ಮಹನೀಯರು ಸಮಾಜ ಸುಧಾರಣೆಗೆ ಪ್ರಯತ್ನಿಸಿದರೂ, ಸಾಮಾಜಿಕ ವ್ಯವಸ್ಥೆ ಇನ್ನೂ ಸಂಪೂರ್ಣವಾಗಿ ಬದಲಾಗಿಲ್ಲ ಎಂದು ಅಭಿಪ್ರಾಯಪಟ್ಟರು.

ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ಬರಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ದೊರೆಯಬೇಕು. “ಇವ ನಮ್ಮವ” ಎನ್ನುವ ಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಕರೆ ನೀಡಿದರು.

ವೈಚಾರಿಕತೆ, ವೈಜ್ಞಾನಿಕತೆ ಮತ್ತು ಮಾನವೀಯತೆ ಹೊಂದಿದ ಶಿಕ್ಷಣ ಅತ್ಯಗತ್ಯವಾಗಿದೆ. ಯುವಜನರಲ್ಲಿ ಮಾನವೀಯತೆ ಹೆಚ್ಚಿಸಲು ಇಂತಹ ಪುಸ್ತಕಗಳು ಸಹಕಾರಿಯಾಗಲಿವೆ. ಈ ಕೃತಿಗಳು ಯುವ ಪೀಳಿಗೆಗೆ ತಲುಪಬೇಕು ಎಂದು ಹೇಳಿದರು.

ಪಂಪ, ಕನಕದಾಸರು, ಬಸವಣ್ಣ, ಕುವೆಂಪು ಅವರ ವಿಚಾರಗಳನ್ನು ಯುವಕರು ತಿಳಿದುಕೊಳ್ಳಬೇಕು. ಮನುಷ್ಯತ್ವವಿಲ್ಲದೆ ಯಾವುದೇ ಪೂಜೆ ಫಲ ನೀಡುವುದಿಲ್ಲ. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಪರಸ್ಪರ ಪ್ರೀತಿ ಅವಶ್ಯಕ ಎಂದು ಹೇಳಿದರು.

ದ್ವೇಷ ಬಿತ್ತುವವರ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು. ಜಾತಿ ವ್ಯವಸ್ಥೆಯನ್ನು ಬಲಪಡಿಸಲು ಪ್ರಯತ್ನಿಸುವವರ ವಿರುದ್ಧ ಜಾಗೃತಿ ಅಗತ್ಯವಿದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಶಾಸಕ ರಿಜ್ವಾನ್ ಅರ್ಷದ್, ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku