
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಗಳ ಕುರಿತು ವಿದ್ಯಾರ್ಥಿನಿಯರಿಗೆ ಸವಿಸ್ತಾರವಾಗಿ ವಿವರಿಸಿದರು. ಅಪ್ರಾಪ್ತ ವಯಸ್ಸಿನಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಕಾನೂನುಗಳು ನೀಡುವ ರಕ್ಷಣೆ ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್ ಹಾಗೂ ದತ್ತು ಕೇಂದ್ರದ ವ್ಯವಸ್ಥಾಪಕಿ ಶ್ರೀಮತಿ ತನುಜಾ ಅವರು ಮಾತನಾಡಿ, ವಿಶೇಷ ದತ್ತು ಕೇಂದ್ರದ ಕಾರ್ಯವೈಖರಿ, ಸರ್ಕಾರದಿಂದ ಮಕ್ಕಳಿಗೆ ಸಿಗುವ ವಿವಿಧ ಸೌಲಭ್ಯಗಳು ಹಾಗೂ ತೊಂದರೆಯಲ್ಲಿದ್ದಾಗ ಉಚಿತವಾಗಿ ಕರೆ ಮಾಡಬಹುದಾದ ‘ಮಕ್ಕಳ ಸಹಾಯವಾಣಿ-೧೦೯೮’ (1098)ರ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಶಾಲೆಯ ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.











Leave a Reply